ಶಿಡ್ಲಘಟ್ಟ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ಅಂತರ್ಜಲ ಚೇತನ” ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎರಡು ದಿನಗಳ ಕ್ಷೇತ್ರ ತರಬೇತಿ ಪ್ರಾತ್ಯಕ್ಷಿಕೆ ಉದ್ಘಾಟಿಸಲಾಯಿತು,
ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ಎಫ್ ಇ ಎಸ್ ಸಂಸ್ಥೆಯ ಸಹಯೋಗದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ಅಂತರ್ಜಲ ಚೇತನ” ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎರಡು ದಿನಗಳ ಕ್ಷೇತ್ರ ತರಬೇತಿ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ ಅಂತರ್ಜಲ ಚೇತನ ಎಫ್ ಇ ಎಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ಎಚ್.ಪಿ. ಪ್ರಸನ್ನಕುಮಾರ್ ಮಾತನಾಡಿ, ನರೇಗಾ ಯೋಜನೆಯ ಅಡಿಯಲ್ಲಿ 2022-23 ನೇ ಸಾಲಿಗೆ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವೈಜ್ಞಾನಿಕವಾಗಿ ಕ್ರಿಯಾಯೋಜನೆ ತಯಾರಿಸುವ ನಿಟ್ಟಿನಲ್ಲಿ ದಿಣ್ಣೆಯಿಂದ ತಗ್ಗು ಪ್ರದೇಶದವರೆಗೆ ಆಧಾರಿತ ಸಮುದಾಯ ಸಹಬಾಗಿತ್ವದೊಂದಿಗೆ ಅನುಸರಿಸಬಹುದಾದ ಹಂತಗಳನ್ನು ತಿಳಿಯುವುದು ತಾಲ್ಲೂಕು ಮಟ್ಟದ ತಾಂತ್ರಿಕ ಸಿಬ್ಬಂದಿಗಳಿಗೆ ಅತ್ಯವಶ್ಯಕವಾಗಿದೆ.
ಕಾಮಗಾರಿಯ ಪ್ರತೀ ಹಂತವನ್ನು ವೈಜ್ಞಾನಿಕವಾಗಿ ನಿರ್ಮಿಸುವ ಜತೆಗೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ನಿರ್ದೇಶನ ನೀಡಬೇಕಾಗಿದೆ.
ಇದರಿಂದಾಗಿ ಈ ಭಾಗದಲ್ಲಿ ಅಂತರ್ಜಲದ ಮಟ್ಟ ವೃದ್ದಿಯಾಗುವುದಲ್ಲದೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಸಾರ್ಥಕತೆ ನಮ್ಮೆಲ್ಲರದ್ದಾಗಿರುತ್ತದೆ. ಇಂತಹ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಯಾವುದೇ ಲೋಪಗಳಾಗದಂತೆ ಮುನ್ನೆಚ್ಚರಿಕೆ ವಹಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಎಲ್ಲರೂ ಒಟ್ಟಾಗಿ ಸೇರಿ ಸರ್ಕಾರದ ಯೋಜನೆಗಳನ್ನು ಸಾಕಾರಗೊಳಿಸುವ ಪ್ರಯತ್ನಕ್ಕೆ ಮುಂದಾಗೋಣ ಎಂದು ಹೇಳಿದರು.
ತರಬೇತಿಯಲ್ಲಿ ಎಫ್ ಇ ಎಸ್ ಸಂಸ್ಥೆಯ ತಾಂತ್ರಿಕ ಸಲಹೆಗಾರರಾದ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ತಾಲ್ಲೂಕು ನರೇಗಾ ತಾಂತ್ರಿಕ ಸಿಬ್ಬಂದಿಗಳು ಭಾಗವಹಿಸಿದ್ದರು.