*ಚಿಕ್ಕಬಳ್ಳಾಪುರ*: ಮಕ್ಕಳ ಆರೋಗ್ಯವೇ ನಮ್ಮ ಆಸ್ತಿಯಾಗಿದ್ದು, ಸ್ವಚ್ಚತೆಗೆ ಹೆಚ್ಚು ಗಮನವಹಿಸಿ ಅತಿಸಾರ ಭೇದಿಗೆ ತುತ್ತಾಗದಂತೆ ಪೋಷಕರು ಹೆಚ್ಚು ಜಾಗೃತಿವಹಿಸಬೇಕು. ಜಿಲ್ಲೆಯಲ್ಲಿ ಈ ರೀತಿ ಪ್ರಕರಣಗಳು ದಾಖಲಾಗದಂತೆ ಆರೋಗ್ಯ ಇಲಾಖೆಯು ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಅವರು ತಿಳಿಸಿದರು. ಅವರು ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಶ್ರಯದಲ್ಲಿ ಜಿಲ್ಲೆಯಾದ್ಯಂತ ಆಗಸ್ಟ್ 1 ರಿಂದ 15 ರವರೆಗೆ “ತೀವ್ರತರ ಅತಿಸಾರ ಭೇದಿಯಿಂದ ಶೂನ್ಯ ಮಕ್ಕಳ ಮರಣ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನ ಹಾಗೂ ಆಗಸ್ಟ್ 1 ರಿಂದ 7 ರವರೆಗೆ “ಶಿಕ್ಷಣ ಮತ್ತು ಬೆಂಬಲದೊಂದಿಗೆ ಸ್ತನ್ಯಪಾನ ವೃದ್ಧಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ವಿಶ್ವ ಸ್ತನ್ಯಪಾನ ಸಪ್ತಾಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಅತಿಸಾರ ಭೇದಿಗೆ ಪರಿಣಾಮಕಾರಿ ಚಿಕಿತ್ಸೆಯಾದ ಓ.ಆರ್.ಎಸ್ ಮತ್ತು ಝಿಂಕ್ ಮಾತ್ರೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿಯುತ ಕೆಲಸ ಆಶಾಕಾರ್ಯಕರ್ತೆಯರದ್ದು. ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿಯೇ ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.ಪೋಷಕರು ವೈಯಕ್ತಿಕ ಶುಚಿತ್ವ, ಪರಿಸರ ನೈರ್ಮಲ್ಯ, ಪೌಷ್ಠಿಕ ಆಹಾರ, ಮಕ್ಕಳ ಸ್ವಚ್ಚತೆ ಹಾಗೂ ಆರೋಗ್ಯಕದ ಕಡೆ ಹೆಚ್ಚು ಗಮನವಹಿಸಬೇಕು. ತಾಯಿ ಮಕ್ಕಳಿಗೆ ಹಾಲುಣಿಸುವ ಮೂಲಕ ಮಕ್ಕಳ ಅತಿಸಾರ ಭೇದಿ ನಿಯಂತ್ರಣ ಹಾಗೂ ತಾಯಂದಿರಲ್ಲಿ ಸ್ತನಕ್ಕೆ ಸಂಬಂಧಿಸಿದ ರೋಗಗಳಿಂದ ಮುಕ್ತರಾಗಬಹುದು. ಆ ನಿಟ್ಟಿನಲ್ಲಿ ಸಾರ್ವಜನಿಕರು ಅರಿತುಕೊಂಡು ಸ್ವಯಂ ಪ್ರೇರಿತರಾಗಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಯಾವುದೇ ರೀತಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ಅವರು ಮಾತನಾಡುತ್ತಾ, ಜಿಲ್ಲೆಯಲ್ಲಿ 178 ಮಕ್ಕಳು ಪೌಷ್ಠಿಕ ಆಹಾರ ಕೊರತೆಯಿಂದ ಬಳಲುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪೋಷಕರು ತಾಯಿ ಮಗುವಿನ ಸ್ವಚ್ಚತೆ ಮತ್ತು ಆರೋಗ್ಯದ ಕಡೆ ಹೆಚ್ಚು ಗಮನವಹಿಸಬೇಕು. ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಜೊತೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಆಶಾಕಾರ್ಯಕರ್ತಯರು ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಆರೋಗ್ಯ ಇಲಾಖೆಯು ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಹಾಗೂ ವಿಶ್ವ ಸ್ತನ್ಯಪಾನ ಸಪ್ತಾಹ ಅಭಿಯಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಅವುಗಳ ಸೌಲಭ್ಯಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದರು. *ಅಗತ್ಯ ಕ್ರಮಗಳು*:ಅತಿಸಾರ ಭೇದಿಯ ಸಮಯದಲ್ಲಿ ಹಾಗೂ ಅತಿಸಾರ ಬೇದಿಯ ನಂತರ ತಾಯಿಯ ಎದೆ ಹಾಲು ಮತ್ತು ಪೂರಕ ಆಹಾರ ಮುಂದುವರೆಸುವುದು. ಮಗು ಹುಟ್ಟಿದಾಗಿನಿಂದ 6 ತಿಂಗಳುಗಳ ವರೆಗೆ ತಾಯಿಯ ಎದೆ ಹಾಲನ್ನು ಮಾತ್ರ ನೀಡುವುದು. ಆಹಾರ ತಯಾರಿಸುವಾಗ ಹಾಗೂ ತಿನ್ನಿಸುವ ಮೊದಲು ಮತ್ತು ನಂತರ ಕೈಗಳನ್ನು ಸಾಬೂನಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಓ.ಆರ್.ಎಸ್ ದ್ರಾವಣ ಹಾಗೂ ಝಿಂಕ್ ಮಾತ್ರೆ ನೀಡಿ ಅತಿಸಾರ ಭೇದಿಯನ್ನು ದೂರ ಓಡಿಸಿ. ಅತಿಸಾರ ಭೇದಿಯ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆ, ಪಿ.ಹೆಚ್.ಸಿ.ಓ ಹಾಗೂ ಸಿ.ಹೆಚ್.ಓ ರವರನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಯಿ ಮಗುವಿಗೆ ಉತ್ತಮ ಪೌಷ್ಠಿಕ ಆಹಾರ ಅಗತ್ಯವಿರುವ ಕಾರಣ ತಾಯಂದಿರಿಗೆ ಹಾಲು ಮತ್ತು ಬೆಲ್ಲದ ಕಿಟ್ ಗಳನ್ನು ವಿತರಿಸಲಾಯಿತು. ಜೊತೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಗಳು ಹಾಗೂ ತಾಯಂದಿರು ಪ್ರತಿಜ್ಞಾವಿಧಿ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಜಿ.ವಿ.ರಾಜಾರೆಡ್ಡಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಎಂ.ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರ ಜಿ.ಹರೀಶ್, ಮಕ್ಕಳ ತಜ್ಞರಾದ ಡಾ.ವೆಂಕಟಾಚಲಪತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಧರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯರ ವೃಂದ, ಸಿಬ್ಬಂದಿ, ಆಶಾಕರ್ಯಕರ್ತೆಯರು, ತಾಯಂದಿರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.