ಚಿಕ್ಕಬಳ್ಳಾಪುರ: ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದಂತೆ 46 ಜಾತಿಗಳಿದ್ದು, ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಮುಖ್ಯವಾಗಿ ಗೊಲ್ಲ, ಹೆಳವ, ಬೆಸ್ತರ ಸಮುದಾಯದವರಿದ್ದು, ಈ ಸಮುದಾಯದವರು ಎಲ್ಲಾ ರೀತಿಯ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ವಕೀಲರಾದ ಶ್ರೀ ಎಂ ಮುನೇಗೌಡ ರವರು ತಿಳಿಸಿದರು.
ಅವರು ಸೋಮವಾರ ಚಿಕ್ಕಬಳ್ಳಾಪುರ ತಾಲ್ಲೂಕು ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಗುಂಗರ್ಲಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ಕಾಲೋನಿಗಳಲ್ಲಿ ಆರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಮುದಾಯದವರು ವಿವಿಧ ಯೋಜನೆಗಳಡಿಯಲ್ಲಿ ಸರ್ಕಾರದ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿದಲ್ಲಿ ಅರ್ಹ ಫಲಾನುಭವಿಗಳಿಗೆ ಎಲ್ಲಾ ಇಲಾಖೆಗಳಲ್ಲಿ ಪ್ರಥಮ ಆಧ್ಯತೆಯನ್ನು ಕೊಡಬೇಕು ಎಂದರು.
ನಾಮ ನಿದೇರ್ಶಿತ ಸದಸ್ಯರಾದ ಗಂಗಾಧರಪ್ಪ ರವರು ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಈ ಸಮುದಾಯದ ವಸತಿ ರಹಿತರಿಗೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಬೇಕೆಂದು ಒತ್ತಾಯ ಮಾಡಿದರು. ತಾಲ್ಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಅವರ ಇಲಾಖೆಗಳಲ್ಲಿ ನೀಡಲಾಗುವ ಸರ್ಕಾರದ ಸವಲತ್ತುಗಳ ಬಗ್ಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಅಲೆಮಾರಿ/ಅರೆ ಅಲೆಮಾರಿ ಸಲಹ ಸಮಿತಿಯ ನಾಮನದೇರ್ಶಿತ ಸದಸ್ಯರು, ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಧ್ಯಕ್ಷರು, ಗುಂಗರ್ಲಹಳ್ಳಿ ಗ್ರಾಮ ಪಂಚಾಯಿತಿ ಸದ್ಯಸ್ಯರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.