ಚಿಕ್ಕಬಳ್ಳಾಪುರ: ನಗರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸಂಬಂಧಿಸಿದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಗುರುವಾರ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್ ಅವರು ಭೇಟಿ ನೀಡಿ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ವಿದ್ಯಾರ್ಥಿನಿಯರು ಬಿಸಿ ನೀರಿನ ವ್ಯವಸ್ಥೆ, ಸ್ಕಾಲರ್ ಶಿಫ್ ಹಾಗೂ ಕಂಪ್ಯೂಟರ್ ಲ್ಯಾಬ್ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತು ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನ್ಯಾಯಾಧೀಶರಾದ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್ ಅವರು ಕೂಡಲೇ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲಾವಣ್ಯ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅರುಣಾ ಕುಮಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶೇಷಾದ್ರಿ ಅವರು ಸೇರಿದಂತೆ ವಕೀಲರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.