ರಾಮನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22 ಸಾಲಿಗೆ ಧನಶ್ರೀ, ಚೇತನ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಕುರಿತಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಆಯ್ಕೆ ಸಮಿತಿ ಸಭೆ ನಡೆಸಲಾಯಿತು.
ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಮಾತನಾಡಿ ಹೆಚ್.ಐವಿ ಸೋಂಕಿತ ಹಾಗೂ ಬಾದಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಮಹಿಳಾ ಅಭಿವೃದ್ಧಿ ನಿಗಮದಿಂದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಇವರನ್ನು ಒಟ್ಟುಗೂಡಿಸಿ ಎನ್.ಆರ್.ಎಲ್.ಎಂ, ಅಡಿ ಸಂಘಗಳನ್ನು ರಚಿಸಿ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸಬೇಕು. ಇವರಿಗೆ ವಿವಿಧ ತರಬೇತಿಗಳನ್ನು ನೀಡಿ ಕೈಗಾರಿಕಾ ಇಲಾಖೆಯೊಂದಿಗೆ ಚರ್ಚಿಸಿ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಲು ಸಹಕರಿಸಬೇಕು ಎಂದರು.
ಧನಶ್ರೀ ಯೋಜನೆಯಡಿ ಹೆಚ್.ಐ.ವಿ ಸೋಂಕಿತ ಹಾಗೂ ಬಾದಿತ ಮಹಿಳೆಯರಿಗೆ ಆರ್ಥಿಕ ಚಟುವಟಿಕೆ ನಡೆಸಲು 30,000 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, 6 ಭೌತಿಕ ಗುರಿ ನಿಗಧಿಯಾಗಿದ್ದು, 6 ಮಹಿಳೆಯರು ಅರ್ಜಿ ಸಲ್ಲಿಸಿದ್ದು, 6 ಜನರನ್ನು ಆಯ್ಕೆ ಮಾಡಲಾಯಿತು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಯೋಜನೆಯಡಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು 30,000 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, 30 ಭೌತಿಕ ಗುರಿ ನಿಗಧಿಯಾಗಿದ್ದು, ಅರ್ಜಿ ಸಲ್ಲಿಸಿರುವ 30 ಜನರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಯಿತು.
ಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರು ಹಾಗೂ ದಮನಿತ ಮಹಿಳೆಯರು ಆರ್ಥಿಕ ಚಟುವಟಿಕೆ ನಡೆಸಲು 30000 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, 3 ಭೌತಿಕ ಗುರಿ ನಿಗಧಿಯಾಗಿದ್ದು, 6 ಜನರು ಅರ್ಜಿ ಸಲ್ಲಿಸಿರುತ್ತಾರೆ. ಜಿಲ್ಲಾಧಿಕಾರಿಗಳು 3 ಜನರನ್ನು ಆಯ್ಕೆ ಮಾಡಿ, ಉಳಿದ 3 ಜನರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೇಂದ್ರ ಕಚೇರಿಗೆ ಪತ್ರ ಬರೆಯುವಂತೆ ತಿಳಿಸಿದರು.
ಉದ್ಯೋಗಿನಿ ಯೋಜನೆ(ಎಸ್.ಸಿ.ಪಿ ಮತ್ತು ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 3 ಲಕ್ಷ ರೂ ಬ್ಯಾಂಕಿನಿAದ ಸಾಲ ಹಾಗೂ ಶೇ 50% ರಷ್ಟು ಸಹಾಯಧನ ನೀಡಲಾಗುವುದು. ಆರ್ಥಿಕ ಗುರಿ 9 ಲಕ್ಷ ರೂ ನಿಗಧಿಯಾಗಿದ್ದು, ಸೇವಾ ಕ್ಷೇತ್ರದ ಆಧಾರದ ಮೇಲೆ ಬ್ಯಾಂಕ್ ವ್ಯವಸ್ಥಾಪಕರು ನೀಡುವ ಸಾಲದ ಮೊತ್ತದ ಅನುಗುಣವಾಗಿ ಸಹಾಯಧನವನ್ನು ಇಲಾಖೆ ವತಿಯಿಂದ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಅಭಿವೃದ್ಧಿ ಅಧಿಕಾರಿ ಗಾಯಿತ್ರಿ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಬಸವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ವಿ. ರಾಮನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್, ಜಿಲ್ಲಾ ಕ್ಷಯ ರೋಗ ನಿರ್ಮುಲನಾಧಿಕಾರಿ ಡಾ: ಕುಮಾರ್, ಸ್ವಾಧರ್ ಸಂಸ್ಥೆಯ ನಾಗಣ್ಣ ಗೌಡ ಹಾಗೂ ವಿವಿಧ ಸ್ವಯಂ ಸೇವಾ ಸಂಘಗಳ ಮುಖ್ಯಸ್ಥರು ಭಾಗವಹಿಸಿದ್ದರು.