ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಹಾಗೂ ತಾಲ್ಲೂಕು ಸವಿತಾ ಸಮಾಜದ ಸಹಯೋಗದಲ್ಲಿ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಶ್ರೀ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಲಿಂಗಪ್ಪ ಮಾತನಾಡಿ, ಸವಿತಾ ಸಮಾಜವು ಹಿಂದುಳಿದ ಸಮುದಾಯವೆಂದು ಯಾರೂ ಕಡೆಗಣಿಸದೆ ಸಮುದಾಯದ ಎಲ್ಲಾ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಮುಂದಾಗಬೇಕು. ಸಮುದಾಯದವರೆಲ್ಲರೂ ಒಗ್ಗೂಡಿ ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಮೂಲಕ ಸಮುದಾಯವನ್ನು ಗುರುತಿಸುವಂತಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಮಂಜೇಶ್, ಸಮುದಾಯದ ಮುಖಂಡರುಗಳಾದ ದೇವರಾಜು, ಹರೀಶ್, ಟಿ.ವಿ. ರಂಗನಾಥ, ವೇಣುಗೋಪಾಲ, ನಾಗೇಂದ್ರ, ಪಾರ್ಥಸಾರಥಿ, ಪಾಲಾಕ್ಷಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಅಧೀಕ್ಷಕ ಸುರೇಶ್ ಕುಮಾರ್, ಸಿಬ್ಬಂದಿಗಳಾದ ಮೇಘನ, ರಾಜೇಶ್, ದರ್ಶನ್ ಸೇರಿದಂತೆ ಮತ್ತಿತರರು ಹಾಜರಿದ್ದರು.