ಶಿಡ್ಲಘಟ್ಟ: ರಾಜಸ್ತಾನ ಸರಕಾರವು ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವುದಾಗಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದು ಅಂತೆಯೆ ಕರ್ನಾಟಕದಲ್ಲೂ ಹಳೆಯ ಪಿಂಚಣಿ ಪದ್ದತಿಯನ್ನು ಜಾರಿ ಮಾಡಲು ರಾಜ್ಯ ಸರಕಾರ ಮುಂದಾಗಬೇಕೆಂದು ಸರಕಾರಿ ನೌಕರರ ಸಂಘದ ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಆಗ್ರಹಿಸಿದರು.
ಶಿಡ್ಲಘಟ್ಟ ತಾಲೂಕು ಸರಕಾರಿ ನೌಕರರ ಸಂಘ, ಎನ್ಪಿಎಸ್ ನೌಕರರ ಸಂಘವು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಸರಕಾರಿ ನೌಕರರಿಗೆ ಇದೀಗ ಇರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಈ ಹಿಂದೆ ಇದ್ದ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಒತ್ತಾಯಿಸಿದರು.
ಶಿಡ್ಲಘಟ್ಟ ನಗರದ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ 2006ರ ಏಪ್ರಿಲ್ 1ರಿಂದ ನೌಕರರಿಗೆನೂತನ ಪಿಂಚಣಿ ಯೋಜನೆ ಜಾರಿಗೆ ತಂದಿದೆ.
ಈ ನೂತನ ಪಿಂಚಣಿ ಯೋಜನೆಯು ನೌಕರರಿಗೆ ಯಾವುದೇ ಉಪಯೋಗವಾಗುವುದಿಲ್ಲ. ಹಾಗಾಗಿ ನೂತನ ಪಿಂಚಣಿ ಯೋಜನೆ ರದ್ದುಪಡಿಸಲು ಧೀರ್ಘ ಹೋರಾಟ ನಡೆಸಿಕೊಂಡು ಬಂದಿದ್ದು ಎಲ್ಲ ಸರಕಾರಗಳ ಗಮನಕ್ಕೂ ತಂದಿದ್ದೇವೆ.
ಆದರೆ ಏನೂ ಪ್ರಯೋಜನವಾಗಿಲ್ಲ. ಈ ಮದ್ಯೆ ರಾಜಸ್ತಾನ ಸರಕಾರವು ಅಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದು ಅದರಂತೆ ರಾಜ್ಯದಲ್ಲೂ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮುಂದಿನ ಅಧಿವೇಶನದಲ್ಲಿ ಘೋಷಿಸಲು ಸಿಎಂ ಬೊಮ್ಮಾಯಿ ಮುಂದಾಗಬೇಕೆಂದು ಮನವಿ ಮಾಡಿದರು.
ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಪ್ರಧಾನ ಕಾರ್ಯದರ್ಶಿ ನರಸಿಂಹರಾಜು,ಸಂಘಟನಾ ಕಾರ್ಯದರ್ಶಿ ಕ್ಯಾತಾಯ್ಯನಿ, ಉಪಾಧ್ಯಕ್ಷ ತನ್ವೀರ್ ಅಹ್ಮದ್ , ಟಿ.ಟಿ.ನರಸಿಂಹಪ್ಪ , ಶಶಿಕುಮಾರ್ ಮತ್ತಿತರರು ಹಾಜರಿದ್ದರು.