ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿಲಕಲನೇರ್ಪು ಹೋಬಳಿ ವ್ಯಾಪ್ತಿಯ ಮಿಟ್ಟಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಮುಂಜಾನೆ ಜೋರಾದ ಶಬ್ದ ಕೇಳಿ ಬಂದು ಈ ಭಾಗದ ಜನರು ಆತಂಕದಲ್ಲಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳ ತನಿಖೆ ಮಾಡಿ, ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವರದಿ ಪಡೆಯಲಾಗಿದ್ದು, ಸದರಿ ಪ್ರದೇಶದಲ್ಲಿ ಯಾವುದೇ ಭೂಕಂಪದ ವಾತಾವರಣ ಇರುವುದಿಲ್ಲವೆಂದು ವರದಿ ಬಂದಿದೆ. ಈ ಬಗ್ಗೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಚಿಂತಾಮಣಿ ತಹಸೀಲ್ದಾರ್ ಹನುಮಂತರಾಯಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.