ಪಾಲಾರ್ ಪಾತ್ರಿಕೆ | Palar Pathrike
ಚಿಕ್ಕಬಳ್ಳಾಪುರ: ಪ್ರಸಕ್ತ ಆರ್ಥಿಕ ಸಾಲಿನ ಇಲಾಖಾವಾರು ನಿಗದಿತ ಯೋಜನೆಗಳು, ಕಾರ್ಯಕ್ರಮಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ತಮ್ಮ ನಿಗದಿತ ಗುರಿಯನ್ನು ಸಾಧಿಸಲು ಕ್ರಮವಹಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ||ಏಕ್ ರೂಪ್ ಕೌರ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ 2022-23 ನೇ ಸಾಲಿನ ವಿವಿಧ ಇಲಾಖೆಗಳ 2022 ರ ನವೆಂಬರ್ ಅಂತ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಗೋಶಾಲೆ ಯೋಜನೆಯಡಿ ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಗೋಶಾಲೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಪ್ರಾರಂಭಿಸುವಂತೆ ಹಾಗೂ ಜಿಲ್ಲೆಯಲ್ಲಿ ಮತ್ತೆರಡು ಗೋಶಾಲೆಗಳನ್ನು ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಆರ್ಥಿಕ ವರ್ಷದ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಮಸ್ಯೆಗಳಿದ್ದಲ್ಲಿ ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜೊತೆಗೆ ಯಾವುದಾದರೂ ಇಲಾಖೆಯ ಕಡತಗಳು, ಪ್ರಸ್ತಾವನೆಗಳು ಸರ್ಕಾರದ ಮಟ್ಟದಲ್ಲಿ ಬಾಕಿ ಇದ್ದಲ್ಲಿ ಗಮನಕ್ಕೆ ತರಲು ತಿಳಿಸಿದರು. ನಂತರ ಕೃಷಿ ತೋಟಗಾರಿಕೆ, ಆರೋಗ್ಯ, ಸಣ್ಣ ನೀರಾವರಿ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ಅಕ್ಷರದಾಸೋಹ, ವಯಸ್ಕರ ಶಿಕ್ಷಣ, ಆಯುಷ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಅರಣ್ಯ, ರೇಷ್ಮೆ ಇಲಾಖೆಗಳ ಇಲಾಖಾವಾರು ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿಯ ಮಾಹಿತಿಯನ್ನು ಪಡೆದು ತ್ವರಿತಗತಿಯಲ್ಲಿ ನಿಗದಿತ ಸಮಯಕ್ಕೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಕಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎಂ.ಧನುರೇಣುಕ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.