ಪಾಲಾರ್ ಪತ್ರಿಕೆ | Palar Patrike
ಮಂಡ್ಯ:- ಮದುವೆಗಳು ನಡೆಯುವ ದೇವಸ್ಥಾನ, ಕಲ್ಯಾಣ ಮಂಟಪ, ರೆಸಾರ್ಟ್ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಮಾಲೀಕರು ಮದುವೆಗೂ ಮುನ್ನ ವಧು, ವರರ ವಯೋಮಿತಿ ದೃಡೀಕರಣಕ್ಕಾಗಿ ಇಲಾಖೆ ನಿಗಧಿಪಡಿಸಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ದೂರು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2022-23 ನೇ ಸಾಲಿನಲ್ಲಿ ಇಲಾಖೆಯಿಂದ 56 ಬಾಲ್ಯ ವಿವಾಹ ತಡೆಯಲಾಗಿದೆ. 40 ಬಾಲ್ಯವಿವಾಹ ನಡೆದು ಎಫ್.ಐ.ಆರ್. ದಾಖಲಿಸಲಾಗಿದೆ. ಇಲಾಖೆಯ ಗಮನಕ್ಕೆ ಬಾರದಂತೆ ಇನ್ನೂ ಹೆಚ್ಚಿನ ಬಾಲ್ಯ ವಿವಾಹ ನಡೆದಿರುವ ಸಂಭವವಿರುತ್ತದೆ. ಬಾಲ್ಯ ವಿವಾಹ ಕುರಿತಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಬಾಲ್ಯ ವಿವಾಹ ಪ್ರಕರಣ ವರದಿಯಾಗುತ್ತಿರುವುದು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.
ಶಿಶು ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಪರಿಶೀಲಿಸಿ. ಗ್ರಾಮ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಬಾಲ್ಯವಿವಾಹ ನಡೆದಿರುವುದಿಲ್ಲ ಎಂದು ದೃಢೀಕರಿಸಬೇಕು. ಶಿಕ್ಷಣ ಇಲಾಖೆ ವತಿಯಿಂದ ಹೆಚ್ಚು ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು. ಮಕ್ಕಳಿಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಬಾಲ್ಯ ವಿವಾಹ ನಿμÉೀಧ ಕಾಯ್ದೆಯಡಿ ವಿಧಿಸಬಹುದಾದ ಶಿಕ್ಷೆಗಳ ಬಗ್ಗೆ ಸಹ ತಿಳಿಸಿ ಎಂದರು.
ದೌರ್ಜನ್ಯ, ಅತ್ಯಾಚಾರಕ್ಕೆ ಯಾಸಿಡ್ ದಾಳಿಗೆ ಸೇರಿದಂತೆ ಇನ್ನಿತರ ಪ್ರಕರಣಗಳಡಿ ಮಹಿಳೆಯರಿಗೆ ಚಿಕಿತ್ಸೆ ನೀಡುವ ಸಖಿ ಒನ್ ಸ್ಟಾಪ್ ಸೆಂಟರ್ ಮಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ಅನುದಾನದಡಿ ಹೊಸ ಕಟ್ಟಡ ನಿರ್ಮಾಣವಾಗಿದ್ದು ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು. ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಸರ್ಕಾರ ಸೂಚಿಸಿರುವಂತೆ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಯಾವುದೇ ತೊಂದರೆ ಇದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.
ಸಂಕಷ್ಟಕ್ಕೊಳಗಾದ ಮಹಿಳೆಯರು, ಪರಿತ್ಯಕ್ತ, ನಿರ್ಗತಿಕ ಹೆಣ್ಣು ಮಕ್ಕಳಿಗೆ ಊಟ-ವಸತು ಮತ್ತು ಅಗತ್ಯ ಸೌಲಭ್ಯ ಒದಗಿಸುವ 4 ಸ್ವಾಧಾರ ಗೃಹಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯ ಮಹಿಳೆಯರಿಗೆ ನಿಗಧಿತವಾಗಿ ಆರೋಗ್ಯ ತಪಾಸಣೆ, ಮಾನಸಿಕ ತೊಂದರೆಗಳಿದ್ದಲ್ಲಿ ಸಮಾಲೋಚನೆಗಳನ್ನು ಏರ್ಪಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2022-23 ನೇ ಸಾಲಿನಲ್ಲಿ 102 ಪ್ರಕರಣಗಳು ದಾಖಲಾಗಿದ್ದು, 10 ಪ್ರಕರಣಗಳಿಗೆ ನ್ಯಾಯಲಯದಲ್ಲಿ ಡಿಐಆರ್ ಸಲ್ಲಿಸಿದ್ದು, ಸಮಾಲೋಚನೆಯಿಂದ 65 ಪ್ರಕರಣಗಳನ್ನು ಇತ್ಯಾರ್ಥಗೊಳಿಸಲಾಗಿದೆ ಹಾಗೂ 27 ಪ್ರಕರಣಗಳು ಬಾಕಿ ಇದ್ದು, ಇವುಗಳನ್ನು ಇತ್ಯಾರ್ಥಗೊಳಿಸುವಂತೆ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಸಮಾಲೋಚನೆ ಮೂಲಕ ಯಾವ ರೀತಿ ಪರಿಹರಿಸಬಹುದು. ಕೆಲವು ಪ್ರಕರಣಗಳು ಸಮಾಲೋಚನೆ ವ್ಯಾಪ್ತಿಗೆ ಒಳಪಡದೇ ನೇರವಾಗಿ ನ್ಯಾಯಲಯದಲ್ಲಿ ಡಿಐಆರ್ ದಾಖಲೆಗೆ ಒಳಪಡಿಸುವುದು ಹೇಗೆ ಎಂಬುದರ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿ ಕುಮಾರಿ ಅವರು ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ವಿವಿಧ ರೀತಿಯ ಪ್ರಕರಣಗಳು ಬರುತ್ತದೆ. ಇವುಗಳನ್ನು ಪರಿಹರಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳಿಗೆ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಉಪಕಾರ್ಯದರ್ಶಿ ಸಂಜೀವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ: ಧನಂಜಯ್, ಲೀಡ್ ಬ್ಯಾಂಕ್ ಮ್ಯಾನೇಜರ್ ದೀಪಕ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ, ಭಾರತೀಯ ರೆಡ ಕ್ರಾಸ್ ಸಂಸ್ಥೆಯ ಉಪಧ್ಯಕ್ಷೆ ಮೀರಾ ಶಿವಲಿಂಗಯ್ಯ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.