ಪಾಲಾರ್ ಪತ್ರಿಕೆ | Palar Pathrike
ತುಮಕೂರು : ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿಯಲ್ಲಿ ಹಂಚಿಹೋಗಿರುವ ಕಾಂಗ್ರೆಸ್ ಮತದಾರರನ್ನು ವಾಪಸ್ ಕರೆತಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರು ಸ್ಥಾಪಿಸಬೇಕು. 20 ವರ್ಷದ ನಂತರ ಈ ಬಾರಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಲು ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮುಖಂಡರಿಗೆ ಮನವಿ ಮಾಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ಮನೆಮನೆಗೂ ಪಕ್ಷದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಗೃಹ ಲಕ್ಷ್ಮಿ ಕಾರ್ಡ್ ವಿತರಣೆ ಮಾಡಿ ಪ್ರಚಾರ ಮಾಡಿ ಎಂದರು.
ಭ್ರಷ್ಟ ಬಿಜೆಪಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ, ಜೆಡಿಎಸ್ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಜನಪರ ಆಡಳಿತ ನೀಡುವ ಕಾಂಗ್ರೆಸ್ ಸರ್ಕಾರವನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಈ ಸ್ಥಿತಿಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಮನೆಮನೆಗೆ ಪ್ರಚಾರ ಮಾಡಿ ಎಂದು ಹೇಳಿದರು.
ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಹೃಚ್. ನಿಂಗಪ್ಪ ಮಾತನಾಡಿ, ಗ್ರಾಮಾಂತರ ಕ್ಷೇತ್ರದ ಹಾಲಿ, ಮಾಜಿ ಶಾಸಕರ ಆರ್ಭಟಗಳಿಗೆ ಜನ ಬೇಸತ್ತಿದ್ದಾರೆ. ಸಜ್ಜನ ನಾಯಕರನ್ನು ಬಯಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಉತ್ತಮ ನಾಯಕತ್ವ ಇದೆ. ಜನರಿಗೆ ಬೇಕಾದ ಯೋಜನೆಗಳನ್ನು ಪಕ್ಷ ರೂಪಿಸುತ್ತದೆ ಎಂದು ಹೇಳಿದರು.
ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದೇನೆ. ಮನೆಮನೆಗಳಲ್ಲಿ ಪಕ್ಷದ ಕಾರ್ಯಕ್ರಮ ಪ್ರಚಾರ ಮಾಡುತ್ತಾ ಚುನಾವಣೆಗೆ ಸಿದ್ಧವಾಗಿದ್ದೇನೆ. ಸ್ಪರ್ಧೆ ಮಾಡುವುದು ಖಚಿತ ಎಂದರು.
ಕ್ಷೇತ್ರ ಉಸ್ತುವಾರಿ ಕೆಂಪಣ್ಣ ಮಾತನಾಡಿ, ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ವರಿಷ್ಠರು ಶೀಘ್ರದಲ್ಲೇ ಘೋಷಣೆ ಮಾಡುತ್ತಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಟ್ಟಾಗಿ ಅವರ ಗೆಲುವಿ ಕೆಲಸ ಮಾಡೋಣ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ರಮೇಶ್, ಒ. ಸಿ. ಕೃಷ್ಣಪ್ಪ, ಭಾಗ್ಯಮ್ಮ, ರತ್ನಮ್ಮ, ಸುಶೀಲಮ್ಮ ಇತರರು ಭಾಗವಹಿಸಿದ್ದರು.