ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಹಾನ್ ಪುರುಷರ, ಸಾಧಕರು, ದಾರ್ಶನಿಕರ ಜಯಂತಿ ಆಚರಣೆಯ ಉದ್ದೇಶ ಅವರ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಮುನ್ನೆಡೆಯಬೇಕೆಂಬುದಾಗಿದೆ. ಸವಿತಾ ಮಹರ್ಷಿ ಅವರ ಆದರ್ಶ ತತ್ವಗಳನ್ನು ಪಾಲನೆ ಮಾಡಬೇಕು ಎಂದರು.
ಸವಿತಾ ಸಮಾಜವು ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ವಿದ್ಯಾಭ್ಯಾಸಕ್ಕಾಗಿ ಸಾಕಷ್ಟು ಸೌಲಭ್ಯಗಳು ಅನುಕೂಲಗಳು ಇವೆ. ಈ ಎಲ್ಲಾ ಪ್ರಯೋಜನ ಪಡೆದು ವ್ಯಾಸಂಗ ಮಾಡಿ ಮುಂದೆ ಬರಬೇಕು. ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಮಹರ್ಷಿಗಳ ಆದರ್ಶಗಳನ್ನು ರೂಢಿಸಿಕೊಂಡು ಆ ಮೂಲಕ ಸಮಾಜದಲ್ಲಿ ಅಭಿವೃದ್ಧಿ ಹೊಂದಬೇಕು. ಸವಿತಾ ಸಮಾಜವು ಈಗಿನ ಕಾಲಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ತಂದು ಉತ್ತೇಜನ ಪಡಿಸುವ ಕೆಲಸ ಮಾಡುತ್ತಿದೆ. ಸಮುದಾಯವು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.
ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಮೂರ್ತಿ ಕುಲಗಾಣ ಅವರು ಮಾತನಾಡಿ ಸವಿತಾ ಮಹರ್ಷಿಗಳು ಆಯುಷ್ಕರ್ಮ, ಧನ್ವಂತರಿ, ವೇದ ಗೀತಗಾಯನ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ವೈಶಿಷ್ಟö್ಯತೆ ತೋರಿದ್ದಾರೆ. ಇವರ ವಿಚಾರಗಳು ಆದರ್ಶನೀಯವಾಗಿದೆ. ಜೀವನದಲ್ಲಿ ಇವುಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಾರ್ಥಕತೆ ಪಡೆದುಕೊಳ್ಳಬೇಕು ಎಂದು ಆಶಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗೂಡೂರು ಭೀಮಸೇನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾದ ಅನಿತ, ಮುಖಂಡರಾದ ಸಿ.ಎ. ಮಹದೇವಶೆಟ್ಟಿ, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ಚಿನ್ನಸ್ವಾಮಿ, ಮುಖಂಡರಾದ ಅರಕಲವಾಡಿ ನಾಗೇಂದ್ರ, ಶ್ರೀನಿವಾಸನಾಯಕ, ರಾಜಣ್ಣ, ಸಿ.ಎಂ. ನರಸಿಂಹಮೂರ್ತಿ, ಬಸವಣ್ಣ, ಪುರುಷೋತ್ತಮ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.